ಚಿಕ್ಕಮಗಳೂರು, 4 ನವೆಂಬರ್ (ಹಿ.ಸ):
ಆ್ಯಂಕರ್ :
ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು ಪ್ರವಾಸಿತಾಣಗಳಿಗೆ ಪ್ರವಾಸಕ್ಕೆ ಬಂದಿದ್ದಾರೆ. ಸದ್ಯ ನಿರ್ಬಂಧ ಹಿನ್ನೆಲೆ ಪ್ರವಾಸಿಗರನ್ನು ವಾಪಸ್ ಕಳಿಸಲಾಗುತ್ತಿದೆ.
ಕಾಫಿನಾಡಿನ ಇನಾಂ ದತ್ತಾತ್ರೇಯ ಪೀಠದಲ್ಲಿ ಶ್ರೀರಾಮಸೇನೆ ವತಿಯಿಂದ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಿಗಳಾಗಿ, 7 ದಿನಗಳ ಕಾಲ ವ್ರತಾಚರಣೆಯಲ್ಲಿದ್ದು, ನವೆಂಬರ್ 5ರಂದು ದತ್ತಪೀಠದಲ್ಲಿ ವಿಶೇಷ ಹೋಮ-ಹವನ ನಡೆಸಲಿದ್ದಾರೆ. ಈ ವರ್ಷದ ದತ್ತಮಾಲಾ ಅಭಿಯಾನಕ್ಕೆ ನಾಗಸಾಧು ಕೂಡ ಆಗಮಿಸಲಿದ್ದಾರೆ. ಹೀಗಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಹಿಂದೂಸ್ತಾನ್ ಸಮಾಚಾರ್
