ಕೋಲಾರ, ೦೭ ನವೆಂಬರ್ (ಹಿ.ಸ) :
ಆ್ಯಂಕರ್ : ದೀಪಾವಳಿ ಹಬ್ಬದ ಸಂದರ್ಭ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದು ಅಥವಾ ಉಪಯೋಗಿಸುವುದನ್ನು ಜಿಲ್ಲೆಯಲ್ಲಿ ನಿಷೇಧಿಸಲಾಗಿದೆ.
ಆದ್ದರಿಂದ ಸಾರ್ವಜನಿಕರು ೧೨೫ ಡಿಬಿ ಅಥವಾ ೧೪೫ ಡಿಬಿಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದು. ಅಲ್ಲದೆ ರಾತ್ರಿ ೧೦ರಿಂದ ಬೆಳಗ್ಗೆ ೬ರವರೆಗೆ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರಗಳ ಸುತ್ತಮುತ್ತಲಲ್ಲಿ ಶಬ್ದವುಂಟು ಮಾಡುವ ನಿಷೇಧಿತ ಪಟಾಕಿ ಸಿಡಿಮದ್ದುಗಳನ್ನು ಬಳಸಬಾರದು. ಬದಲಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಸರ್ವೋಚ್ಚ ನ್ಯಾಯಾಲಯವು ಅನುಮತಿ ನೀಡಿದೆ.
ನಗರ ಮತ್ತು ಪಟ್ಟಣದ ಚಿಕ್ಕ ಬೀದಿಗಳಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳನ್ನು ಬಾಣ, ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಉಂಟಾಗುವ, ಬೆಂಕಿ ಅಥವಾ ಸ್ಪೋಟದಿಂದ ಅಪಾಯಗಳಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಸಿಡಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ರವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಚಿತ್ರ : ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ
