
ಬೆಂಗಳೂರು, 29 ಡಿಸೆಂಬರ್(ಹಿ.ಸ):
ಆ್ಯಂಕರ್ :ಬಡ, ಮಧ್ಯಮ ವರ್ಗದ ಜನತೆಗೆ, ವಿಶೇಷವಾಗಿ ರಾಜ್ಯಕ್ಕೆ ವಲಸೆ ಬರುವ ಕಾರ್ಮಿಕರಿಗೆ ಕೈಗೆಟಕುವ ಪ್ರಯಾಣ ದರದಲ್ಲಿ ಸೇವೆ ಒದಗಿಸುವ ‘ಅಮೃತ್ ಭಾರತ್’ ರೈಲು ರಾಜ್ಯಕ್ಕೂ ದಕ್ಕಿದ್ದು, ಪಶ್ಚಿಮ ಬಂಗಾಳದ ಮಾಲ್ಡಾ-ಬೆಂಗಳೂರು ನಡುವೆ ಸಂಚರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಡಿ.30ರಂದು ಈ ರೈಲಿಗೆ ಚಾಲನೆ ನೀಡಲಿದ್ದು, ಉದ್ಘಾಟನಾ ಸಂಚಾರಾರ್ಥ ಜನವರಿ 1 ರಂದು ‘ಅಮೃತ್ ಭಾರತ್’ ನಗರಕ್ಕೆ ಆಗಮಿಸಲಿದೆ. ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಲ್ಲಿ ನಿಲುಗಡೆಯಾಗಲಿದೆ. ಮುಂದಿನ ಒಂದು ವಾರದಲ್ಲಿ ವಾಣಿಜ್ಯ ಸಂಚಾರ ಪ್ರಾರಂಭಿಸಲಿದೆ. ಈ ರೈಲಿನ ವೇಳಾಪಟ್ಟಿ, ದರಪಟ್ಟಿ ಇನ್ನಷ್ಟೇ ನಿಗದಿ ಆಗಬೇಕಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ರೈಲು ಕರ್ನಾಟಕದ ಜನತೆಗೆ ಎನ್ನುವುದಕ್ಕಿಂತ ಹೆಚ್ಚಾಗಿ ಪಶ್ಚಿಮ ಬಂಗಾಳ, ಬಿಹಾರ, ಒಡಿಶಾದಿಂದ ರಾಜ್ಯಕ್ಕೆ ಬರುವ ಕಟ್ಟಡ, ಮೀನುಗಾರಿಕೆ, ರಸ್ತೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಈ ರೈಲಿನಲ್ಲಿ ಸುಮಾರು 1,800 ಮಂದಿ ಆರಾಮವಾಗಿ ಪ್ರಯಾಣಿಸಬಹುದು. ಮಾಲ್ಡಾ ಪಶ್ಚಿಮ ಬಂಗಾಳದಲ್ಲಿದ್ದರೂ, ಬಿಹಾರ ಗಡಿಗೆ ಸಮೀಪದಲ್ಲಿದೆ ಎಂಬುದು ಗಮನಾರ್ಹ.
ಇದು ಬಂಗಾಳ, ಒಡಿಶಾ, ಆಂಧ್ರಪ್ರದೇಶದಲ್ಲಿ ಸಂಚರಿಸಿ ತಮಿಳುನಾಡು ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಮಾಲ್ಡಾ, ಖರಗಪುರ್, ಬಾಲಾಸೋರ್, ಭುವನೇಶ್ವರ, ಪುರಿ, ಸೀತಾಕುಳಂ, ವಿಜಯನಗರಂ, ವಿಶಾಖ ಪಟ್ಟಣಂ, ವಿಜಯವಾಡ, ನೆಲ್ಲೂರು, ಗುಡೂರು, ರೇಣಿಗುಂಟ, ಸಾತಪಾಡಿ, ಜೋಲಾರಪೇಟೆ, ಬಂಗಾರಪೇಟೆ ಮೂಲಕ ಎಸ್ಎಂವಿಟಿ ನಿಲ್ದಾಣಕ್ಕೆ ಬರಲಿದೆ.
ಅಮೃತ್ ಭಾರತ್ ಗಂಟೆಗೆ ಗರಿಷ್ಠ 130 ಕಿ.ಮೀ. ವೇಗದಲ್ಲಿ ಸಂಚರಿಸಲಿದೆ. ಇದು ಮೆಮು ರೈಲಿನ ರೀತಿಯಲ್ಲೆ ಮುಂಭಾಗ- ಹಿಂಭಾಗ ಎಂಜಿನ್ ಹೊಂದಿದ್ದು, ಡೆಡ್ ಎಂಡ್ನಲ್ಲಿ ನಿಂತಾಗ ಎಂಜಿನ್ ಅನ್ನು ಬದಲಿಸುವ ಅಗತ್ಯ ಇರುವುದಿಲ್ಲ. ಜೊತೆಗೆ ಪುಷ್ಪುಲ್ ಟೆಕ್ನಾಲಜಿ, ಎಲ್ಎಚ್ಬಿ ಮಾದರಿಯ ಬೋಗಿ ಹೊಂದಿರಲಿದೆ. ದ್ವಿತೀಯ ದರ್ಜೆಯ ಸ್ಲೀಪರ್ ಕೋಚ್ ಹಾಗೂ ಕಾಯ್ದಿರಿಸದ ಸೇರಿ 22 (12 8) ಕೋಚ್ಗಳನ್ನು ಒಳಗೊಂಡಿದ್ದು, ಇದರಲ್ಲಿ ಹವಾ ನಿಯಂತ್ರಿತ (ಎಸಿ) ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲುಗಳು ಇರುವುದಿಲ್ಲ. ಉಳಿದಂತೆ ಸಿಸಿಟಿವಿ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಎಲ್ಇಡಿ ಲೈಟ್ ಸೇರಿ ಇತರೆ ಸೌಲಭ್ಯಗಳು ಇರಲಿವೆ.
ಹಿಂದೂಸ್ತಾನ್ ಸಮಾಚಾರ್
