ಅಯೋಧ್ಯೆ, 1 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ, ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ.
ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಪ್ರಕರಣದ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕಳುಹಿಸಲಾಗಿದೆ. ಮೇಲ್ನಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ. ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದ್ದು, ಐಎಸ್ಐ ಜತೆ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾನೆ.
ದೇವೇಂದ್ರ ತಿವಾರಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
