


ಕೊಪ್ಪಳ, 15 ಫೆಬ್ರವರಿ :
ಆ್ಯಂಕರ್: ಕನಕಗಿರಿ ಉತ್ಸವ-2024 ಅನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಇದರ ಅಂಗವಾಗಿ ಅಚ್ಚುಕಟ್ಟು ನಿರ್ವಹಣೆಗೆ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ. ಅಧಿಕಾರಿಗಳು ತಮಗೆ ಹಂಚಿಕೆ ಮಾಡಿದ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಕನಕಗಿರಿ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿಗಳು ಹಾಗೂ ಕನಕಗಿರಿ ಉತ್ಸವ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಕಗಿರಿ ಉತ್ಸವ-2024 ರ ಅಂಗವಾಗಿ ಆಯೋಜಿಸಲಾಗಿದ್ದ ಪೂರ್ವಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನಕಗಿರಿ ಉತ್ಸವದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚಿನ ಆಸಕ್ತಿ ವಹಿಸಿದ್ದು, ಸಮಿತಿಗಳು ತಮಗೆ ಹಂಚಿಕೆ ಮಾಡಿದ ಕಾರ್ಯಗಳ ಕುರಿತು ಒಂದು ನಿರ್ದಿಷ್ಟ ಯೋಜನೆಯನ್ನು ರಚಿಸಿ, ಅದನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಬೇಕು. ಉತ್ಸವ ಕುರಿತ ಎಲ್ಲ ಕಾರ್ಯಗಳ ಬಗ್ಗೆ ಸಚಿವರಿಗೆ ಮಾಹಿತಿ ಇರಬೇಕು. ಕೊನೆ ಹಂತದಲ್ಲಿ ಯಾವುದೇ ಬದಲಾವಣೆ ಅಥವಾ ಗೊಂದಲಕ್ಕೆ ಅವಕಾಶವಿರಬಾರದು. ಆದ್ದರಿಂದ ಸಮಿತಿಯಲ್ಲಿನ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳು ಸೂಚಿಸಿದರು.
ಉತ್ಸವದ ಅಂಗವಾಗಿ ಮೆರವಣಿಗೆ, ಸೈಕಲ್ ಜಾಥಾ, ಮ್ಯಾರಾಥಾನ್ ಆಯೋಜಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಉತ್ಸವದ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ದೇಸೀ ಕ್ರೀಡೆಗಳು, ಸ್ಥಳೀಯ ಸಾಂಪ್ರದಾಯಿಕ ಕ್ರೀಡೆಗಳಿಗೆ ಅವಕಾಶ ನೀಡಬೇಕು. ಕಲಾತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಕಲಾತಂಡಗಳ ಸಂಭಾವನೆ, ಕಲಾತಂಡಗಳ ಸಂಖ್ಯೆ, ಕಲಾವಿದರ ವಸತಿ, ಊಟದ ವ್ಯವಸ್ಥೆಗೆ ಅಗತ್ಯ ರೀತಿಯಲ್ಲಿ ಕ್ರಮ ವಹಿಸಬೇಕು. ಉತ್ಸವದ ಉದ್ಘಾಟನಾ ಅಂಗವಾಗಿ ಮೆರವಣಿಗೆಯನ್ನು ಆಯೋಜಿಸಬೇಕು. ಕನಕಗಿರಿಯಲ್ಲಿ ಹೆಚ್ಚಿನ ಸ್ಥಳಾವಕಾಶವಿರುವ, ದೊಡ್ಡ ರಸ್ತೆಗಳಲ್ಲಿ ಮೆರವಣಿಗೆ ಆಯೋಜಿಸಬೇಕು. ಮೆರವಣಿಗೆಯಲ್ಲಿ ಕಲಾತಂಡಗಳು, ಸಾರ್ವಜನಿಕರು ಭಾಗವಹಿಸುವುದರಿಂದ ಹೆಚ್ಚಿನ ಸ್ಥಳಾವಕಾಶವಿರುವ ರಸ್ತೆಗಳನ್ನು ಗುರುತಿಸಿ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಉತ್ಸವದಲ್ಲಿ ಅಂದಾಜು 2 ಲಕ್ಷದವರೆಗೆ ಜನರು ಭಾಗವಹಿಸುವ ಸಾಧ್ಯತೆ ಇದ್ದು, ಭಾಗವಹಿಸುವ ಕಲಾವಿದರು, ಅಧಿಕಾರಿಗಳು, ಸಾರ್ವಜನಿಕರಿಗೆ ಅಚ್ಚುಕಟ್ಟು ಊಟದ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರಿ ಹಾಗೂ ಖಾಸಗಿ ವಾಹನಗಳಿಗೆ ಸೂಕ್ತ ರೀತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು. ಕನಕಗಿರಿಯಲ್ಲಿ ಇರುವ ಮತ್ತು ಕನಕಗಿರಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಪರಿಶೀಲಿಸಿ, ದುರಸ್ತಿ ಇರುವ ಕಡೆಯಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಿ.
ಉತ್ಸವದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಠಾಚಾರ ಪಾಲಿಸಬೇಕು. ಜಿಲ್ಲೆಯ ಯುನೆಸ್ಕೋ ಪಾರಂಪರಿಕ ತಾಣಗಳು, ಕರಡಿ ಧಾಮ, ಕೊಪ್ಪಳ ಕೋಟೆ, ಇಟಗಿಯ ಮಹದೇವ ದೇವಾಲಯ ಸೇರಿದಂತೆ ಪ್ರಮುಖ ಸ್ಮಾರಕಗಳು, ಶಿಷ್ಠಾಚಾರದಂತೆ ಲೋಗೋಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಎರಡು ದಿನಗಳಲ್ಲಿ ಎಲ್ಲ ಸಮಿತಿಗಳು ತಮ್ಮ ಹಂತದಲ್ಲಿ ಚರ್ಚಿಸಿ, ವ್ಯವಸ್ಥಿತ ಯೋಜನೆಯ ವರದಿಯನ್ನು ಸಲ್ಲಿಸಬೇಕು. ಉತ್ಸವದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಒದಗಿಸಬೇಕು. ಸಮಿತಿಯಲ್ಲಿ ಅಗತ್ಯವಿದ್ದರೆ ತಮ್ಮ ಅಧೀನ ಸಿಬ್ಬಂದಿ ಅಥವಾ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿಕೊಂಡು ಉತ್ಸವದಲ್ಲಿ ಯಾವುದೇ ಕೊರತೆ, ಗೊಂದಲ, ಅನನುಕೂಲವಾಗದಂತೆ ಎಚ್ಚರ ವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಸಹಾಯಕ ಆಯುಕ್ತರಾದ ಕ್ಯಾ.ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಸೇರಿದಂತೆ ಎಲ್ಲ ಸಮಿತಿಗಳ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.
