ರಾಯಚೂರು, 19 ಅಕ್ಟೋಬರ್ :
ಆ್ಯಂಕರ್ : ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಲು ನ.6ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸುವಲ್ಲಿ ಹೆಚ್ಚಿನ ಶ್ರಮ ವಹಿಸಬೇಕು ಮತ್ತು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಹೇಳಿದ್ದಾರೆ.
ಅವರು ಅ.19ರ(ಗುರುವಾರ) ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳು ಹಾಗೂ ಜಿಲ್ಲೆಯ ಎಲ್ಲಾ ಪದವಿ, ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ.6 ಅರ್ಜಿ ನಮೂನೆ 18ರಲ್ಲಿ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವಾಗಿದ್ದು, ನ.23ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳುತ್ತದೆ. ನಂತರ ನ.23ರಿಂದ ಡಿ.9ರವರೆಗೆ ಕರಡು ಮತದಾರರ ಪಟ್ಟಿಯ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗುವುದು ಮತ್ತು ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳುತ್ತದೆ ಎಂದು ತಿಳಿಸಿದರು.
ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅ.16, ಅ.26 ಮತ್ತು ಅ.30ರಂದು ಮತದಾರರ ವಿಶೇಷ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಜಿಲ್ಲೆಯ 7 ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಯಚೂರು ತಾಲೂಕಿಗೆ ಸಹಾಯಕ ಆಯುಕ್ತೆ ಮಹಿಬೂಬಿ ಅವರನ್ನು ನೇಮಕ ಮಾಡಲಾಗಿದೆ. ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಸಹಾಯಕ ಆಯುಕ್ತ ಅವಿನಾಶ ಶಿಂಧೆ, ಮಾನವಿ ಮತ್ತು ಸಿರವಾರ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ದೇವದುರ್ಗ ಮತ್ತು ಅರಕೇರಾ ತಾಲೂಕು ವ್ಯಾಪ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ, ಮಸ್ಕಿ ತಾಲೂಕು ವ್ಯಾಪ್ತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ ಹಾಗೂ ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹ್ಮದ್ ಜಿಲಾನಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 29 ಮತದಾನ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಮತದಾನ ಕೇಂದ್ರಗಳಲ್ಲಿ ಸುವ್ಯವಸ್ಥಿತವಾಗಿ ಮತದಾನ ನಡೆಸಲು ಎಲ್ಲಾ ಮತಗಟ್ಟೆಗಳನ್ನು ಭೌತಿಕವಾಗಿ ಪರಿಗಣಿಸಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಮತದಾರರು ಯಾರೊಬ್ಬರು ಹೊರಗುಳಿಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ನೊಂದಾಯಿಸಿಕೊಳ್ಳಬೇಕು ಅದಕ್ಕಾಗಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯವಾಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ರಾಯಚೂರು ವಿಶ್ವವಿದ್ಯಾಲಯದ ಡೆಪ್ಯೂಟಿ ರಿಜಿಸ್ಟ್ರಾರ್ ಬಿರಾದಾರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಮರೇಶ.ವೈ, ಚುನಾವಣಾ ತರಬೇತಿದಾರ ಸದಾಶಿವಪ್ಪ, ಚುನಾವಣಾ ಆಯೋಗದ ರಮೇಶ, ರಾಜಕೀಯ ಪಕ್ಷಗಳ ಮುಖಂಡರಾದ ತಿರುಮಲರೆಡ್ಡಿ, ವಿರೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
