ಹೈದರಾಬಾದ್, 5 ಫೆಬ್ರವರಿ :
ಆ್ಯಂಕರ್ : ತೆಲುಗು ಚಿತ್ರರಂಗದ ಖ್ಯಾತ ಚಿತ್ರ ನಟ, ರಾಜಕಾರಣಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಆಂಧ್ರ ಪ್ರದೇಶದಲ್ಲಿ ಸಂಚಲನ ಉಂಟು ಮಾಡಿದೆ.
ಉಭಯ ನಾಯಕರು ಮುಂಬರುವ ಆಂಧ್ರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಸ್ಥಾನ ಹಂಚಿಕೆ ಕುರಿತು ಗಂಟೆಗಳ ಕಾಲ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಕಳೆದ ತಿಂಗಳು ನಾಯ್ಡು ಮತ್ತು ಪವನ್ ಕಲ್ಯಾಣ್ ಈ ವರ್ಷ ನಡೆಯಲಿರುವ ಆಂಧ್ರ ಪ್ರದೇಶ ವಿಧಾನ ಸಭೆ ಚುನಾವಣೆಗೆ ಎರಡು ವಿಧಾನಸಭಾ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿದರು.
ಪವನ್ ಅವರು ರಾಜನಗರಂ ಮತ್ತು ರಜೋಲ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದರೆ, ಚಂದ್ರಬಾಬು ಅರಕು ಮತ್ತು ಮಂಡಪೇಟ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದರು, ಇದು ಟಿಡಿಪಿ-ಜೆಎಸ್ಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಿದೆ ಎಂದು ಆರೋಪಿಸಲಾಗಿದೆ.
ರಾಜಕೀಯ ಒತ್ತಡಕ್ಕೆ ಮಣಿದ ಪವನ್ ಅವರು ಎರಡು ಸ್ಥಾನಗಳಲ್ಲಿ ಸ್ರ್ಪಧಿಸುವ ತಮ್ಮ ಪಕ್ಷದ ನಿರ್ಧಾರವನ್ನು ತಿಳಿಸಿದರು. ಚಂದ್ರಬಾಬು ಅವರಂತೆ ನಾನು ಕೂಡ ಒತ್ತಡದಲ್ಲಿದ್ದೇನೆ. ಅದಕ್ಕಾಗಿಯೇ ಜನಸೇನೆ ಎರಡು ಕ್ಷೇತ್ರಗಳಲ್ಲಿ ಸ್ರ್ಪಧಿಸುತ್ತದೆ ಎಂದು ನಟ ಹಾಗೂ ರಾಜಕಾರಣಿ ಹೇಳಿದ್ದಾರೆ. ಆಂಧ್ರ ಪ್ರದೇಶದಲ್ಲಿ ಈ ವರ್ಷ ಲೋಕಸಭೆ ಚುನಾವಣೆ ಜತೆಗೆ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
