ಬೆಂಗಳೂರು, 19ಜನವರಿ(ಹಿ.ಸ):
ಆ್ಯಂಕರ್ :
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿ.ಮಾರೇನಹಳ್ಳಿ ಗ್ರಾಮದಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದರು.
ಬಿಐಇಟಿಸಿ ಕೇಂದ್ರದಿಂದ ಜಾಗತಿಕ ಏರೋಸ್ಪೇಸ್ ಉದ್ಯಮದ ಪ್ರಗತಿಗೆ ನೆರವು ನೀಡಲಾಗುತ್ತಿದೆ. 3,000ಕ್ಕೂ ಹೆಚ್ಚು ಇಂಜಿನಿಯರ್ಗಳನ್ನು ಹೊಂದುವ ಗುರಿಯನ್ನು ಬಿಐಇಟಿಸಿ ಹಾಕಿಕೊಂಡಿದೆ. ಸಂಶೋಧನೆ ಮತ್ತು ಅಭಿವೃದ್ಧಿ, ಕೃತಕ ಬುದ್ಧಿಮತ್ತೆ, ಮೆಷಿನ್ ಲರ್ನಿಂಗ್, ಇಂಡಸ್ಟ್ರಿಯಲ್ ಇಂಟರ್ನೆಟ್ ಆಫ್ ಥಿಂಗ್ಸ್, ಕ್ಲೌಡ್ ಕಂಪ್ಯೂಟಿಂಗ್, ಮಾಡೆಲ್ ಆಧಾರಿತ ಇಂಜಿನಿಯರಿಂಗ್ ಮತ್ತು ಅಡ್ಡಿಟಿವ್ ಉತ್ಪಾದನೆಯತ್ತ ಗಮನ ಕೇಂದ್ರೀಕರಿಸಲಿದೆ.
ಏನಿದು ಬೋಯಿಂಗ್ ಸುಕನ್ಯಾ ಯೋಜನೆ?
ದೇಶಾದ್ಯಂತ ಹೆಚ್ಚು ಹೆಣ್ಣು ಮಕ್ಕಳು ವೈಮಾನಿಕ ವಲಯಕ್ಕೆ ಸೇರಲು ನೆರವಾಗುವ ಉದ್ದೇಶ ಹೊಂದಿರುವ ಬೋಯಿಂಗ್ ಸುಕನ್ಯಾ ಯೋಜನೆ. ಈ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪ್ರಮುಖ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ ಕೌಶಲಗಳನ್ನು ಸಂಪಾದಿಸಲು ಅವಕಾಶ ಕಲ್ಪಿಸಲಿದೆ. ಹೆಣ್ಣುಮಕ್ಕಳನ್ನು ವೈಮಾನಿಕ ಉದ್ಯೋಗಗಳಿಗೆ ಸಿದ್ಧಗೊಳಿಸಲಿದೆ.
ಬಾಲಕಿಯರಿಗಾಗಿ ಬೋಯಿಂಗ್ ಸುಕನ್ಯಾ ಯೋಜನೆ 150 ಸ್ಥಳಗಳಲ್ಲಿ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ತೆರೆಯಲಿದೆ. ವೈಮಾನಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಪಡೆಯಲು ಉತ್ತೇಜನ ನೀಡಲಿರುವ ಯೋಜನೆ. ಈ ಯೋಜನೆಯಡಿ ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಬಾಲಕಿಯರಿಗೂ ವಿದ್ಯಾರ್ಥಿ ವೇತನ ಸಿಗಲಿದೆ.
ಹಿಂದೂಸ್ತಾನ್ ಸಮಾಚಾರ್
