
ಕೋಲಾರ, ನವೆಂಬರ್ ೦೧ (ಹಿ.ಸ):
ಆ್ಯಂಕರ್ : ಕನ್ನಡದ ಚಿಂತನೆಗಳು ಜಗತ್ತಿನೆಲ್ಲೆಡೆ ಪಸರಿಸಲಿ ಜಗತ್ತಿನ ಚಿಂತನೆಗಳು ಕನ್ನಡಕ್ಕೆ ಬರಲಿ. ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು ಸಂದಿವೆ. ಕನ್ನಡ ನಿತ್ಯೋತ್ಸವ ಆಗಬೇಕು. ಎಲ್ಲೆಡೆ ಕನ್ನಡದ ವಾತಾವರಣ ಪಸರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಬಾಲಕರ ಸರ್ಕಾರಿ ಪದವೀಪೂರ್ವ ಕಾಲೇಜು ಮೈದಾನದಲ್ಲಿ ನಡೆದ ೬೮ ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಎಂದು ನಾಮಕರಣ ಮಾಡಿ ೫೦ ವರ್ಷಗಳು ಆಗಿರುವ ಹಿನ್ನೆಲೆ ನವೆಂಬರ್ ೦೧, ೨೦೨೪ ರವರಿಗೆ ಕನ್ನಡದ ಬೆಳವಣಿಗೆ, ಅಭಿವೃದ್ಧಿಗೆ ಸಂಬ0ಧಿಸಿದ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ಚೆಲುವ ಕನ್ನಡನಾಡು, ರಾಷ್ಟ್ರಕವಿ ಕುವೆಂಪು ಅವರ ಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆ0ದಿಗೂ ನೀ ಕನ್ನಡವಾಗಿರು, ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ ಅವರ ಹೊತ್ತಿತು ಹೊತ್ತಿತು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಗೀತೆಗಳನ್ನು ಕಲಾವಿದರಿಂದ ಪ್ರಸ್ತುತಪಡಿಸಲಾಯಿತು. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ಗಣ್ಯರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಜಿಲ್ಲಾಧಿಕಾರಿಗಳು ತೆರೆದ ವಾಹನದಲ್ಲಿ ತುಕಡಿಗಳ ಪರಿವೀಕ್ಷಣೆ ಮಾಡಿದರು. ಪೆರೇಡ್ ನಲ್ಲಿ ೬ ತಂಡಗಳು ಭಾಗವಹಿಸಿದ್ದವು. ಆಕರ್ಷಕ ಪಥ ಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ ಕೋಲಾರ ಸಂಸದರಾದ ಎಸ್.ಮುನಿಸ್ವಾಮಿ, ಕೋಲಾರ ವಿಧಾನಸಭಾ ಶಾಸಕರಾದ ಡಾ. ಕೊತ್ತೂರು ಜಿ ಮಂಜುನಾಥ್, ವಿಧಾನ ಪರಿಷತ್ ಶಾಸಕರಾದ ಎಂ ಎಲ್ ಅನಿಲ್ ಕುಮಾರ್, ಇಂಚರ ಗೋವಿಂರಾಜು, ಕಸಾಪ ಜಿಲ್ಲಾ ಅಧ್ಯಕ್ಷರು ಗೋಪಾಲಗೌಡ, ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಚಿತ್ರ :
೧. ಕೋಲಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಪೊಲಿಸ್ ಪಡೆಗಳಿಂದ ಗೌರವ ರಕ್ಷೆ ಸ್ವೀಕರಿಸಿರು.
೨. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೫ ಮಂದಿಗೆ ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
