


ಕೊಪ್ಪಳ, 17 ಜನವರಿ(ಹಿ.ಸ):
ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಎಲ್ಲ ಇಲಾಖೆಗಳು, ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾ ಕೇಂದ್ರದಲ್ಲಿ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಕುರಿತು ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಕಾರ್ಯಕ್ರಮದ ಅಚ್ಚುಕಟ್ಟು ವ್ಯವಸ್ಥೆಗಾಗಿ ರಚಿಸಿದ ಎಲ್ಲ ಸಮಿತಿಗಳಿಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿಗಳು ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಅಂದು ನಡೆಯುವ ಎಲ್ಲ ಕಾರ್ಯಕ್ರಮಗಳ ಪಟ್ಟಿಯು ಜನವರಿ 24 ರಂದೇ ಅಂತಿಮಗೊಳ್ಳಬೇಕು. ಸನ್ಮಾನ, ಪ್ರಶಸ್ತಿ ವಿತರಣೆ ಮುಂತಾದ ಯಾವುದೇ ಕಾರ್ಯಕ್ರಮಗಳು ಕೊನೆ ಕ್ಷಣದಲ್ಲಿ ನಿರ್ಧರಿಸುವಂತವುಗಳಲ್ಲ. ಆದ್ದರಿಂದ ಯಾವುದೇ ಇಲಾಖೆಗಳ ಕಾರ್ಯಕ್ರಮಕ್ಕೆ ಚಾಲನೆ, ಸಾಧಕರ ಸನ್ಮಾನ, ಪ್ರಶಸ್ತಿ ವಿತರಣೆ ಕುರಿತು ಜನವರಿ 24 ರೊಳಗೆ ಪಟ್ಟಿ ನೀಡಿ ಅಂತಿಮಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಅಚ್ಚುಕಟ್ಟು ವ್ಯವಸ್ಥೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿ ಹಂಚಿಕೆ ಮಾಡಿದ ಎಲ್ಲ ಕಾರ್ಯಗಳನ್ನು ಯಾವುದೇ ಲೋಪದೋಷವಿಲ್ಲದಂತೆ, ಬೇಜವಾಬ್ದಾರಿ ತೋರದೆ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಗೊಂದಲಗಳಿದ್ದಲ್ಲಿ ಸಂಬಂಧಿಸಿದ ಮೇಲಧಿಕಾರಿಯನ್ನು ಸಂಪರ್ಕಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು, ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಸ್ಚಚ್ಛತೆ ಹಾಗೂ ವಿದ್ಯುತ್ ದೀಪಗಳ ಅಲಂಕಾರವನ್ನು ನಗರಸಭೆ ನಿರ್ವಹಿಸಬೇಕು. ಶಾಲಾ ಮಕ್ಕಳು ಕ್ರೀಡಾಂಗಣ ಹಾಗೂ ಕ್ರೀಡಾಂಗಣದಿಂದ ಶಾಲೆಗಳಿಗೆ ತೆರಳಲು ಕೆಕೆಆರ್ಟಿಸಿ ಇಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು. ವೇದಿಕೆ ಅಲಂಕಾರಕ್ಕೆ ತೋಟಗಾರಿಕೆ ಇಲಾಖೆಯಿಂದ ಗಿಡಗಳನ್ನು ಒದಗಿಸಬೇಕು. ಸಚಿವರು ಅಂದು ಬೆಳಿಗ್ಗೆ ಕಾರ್ಯಕ್ರಮಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ಆಗಮಿಸುವುದರಿಂದ ಎಲ್ಲ ಅಧಿಕಾರಿಗಳು ಅದಕ್ಕೂ ಮೊದಲೇ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಸ್ವಾತಂತ್ರ್ಯ ಹೋರಾಟಗಾರರು, ವಿಶೇಷ ಸಾಧಕರಿಗೆ ಸನ್ಮಾನಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಗಣರಾಜ್ಯೋತ್ಸವ ದಿನದಂದು ಪರೇಡ್ಗೆ ಆಗಮಿಸುವ ಶಾಲಾ, ಕಾಲೇಜು ಮಕ್ಕಳಿಗೆ ಬಿಸ್ಕಿಟ್ ಹಾಗೂ ನಿಂಬು ಪಾನೀಯವನ್ನು ಒದಗಿಸಬೇಕು. ಕ್ರೀಡಾಂಗಣದಲ್ಲಿ ಬಿಸಿಲಿಗೆ ಮಕ್ಕಳು ಬಳಲದಂತೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ಅಂದು ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಜಾಗೃತಿ ಜಾಥಾ ಆರಂಭವಾಗುವುದರಿಂದ ಸಚಿವರು ಜಾಥಾಕ್ಕೆ ಚಾಲನೆ ನೀಡುವರು. ಆದ್ದರಿಂದ ಎಲ್ಲ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸಾಂಸ್ಕøತಿಕ ಕಾರ್ಯಕ್ರಮಗಳು, ಪರೇಡ್ ತಂಡಗಳನ್ನು ನಿಯಮಾನುಸಾರ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಉಳಿದಂತೆ ನಿಯೋಜಿತ ಸಮಿತಿ ಸದಸ್ಯರು ತಮಗೆ ವಹಿಸಿದ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಮಾತನಾಡಿ, ತಹಶೀಲ್ದಾರರು ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳನ್ನು, ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಅಗ್ನಿಶಾಮಕ ಅಧಿಕಾರಿಗಳು ಕ್ರೀಡಾಂಗಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿ ಅವಘಡ ಸಂಭವಿಸದಂತೆ ಇಲಾಖೆಯ ವಾಹನ ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು. ಡಿಡಿಪಿಐ ಹಾಗೂ ಡಿಡಿಪಿಯು ರವರು ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವುದು, ನಂತರ ಸುರಕ್ಷಿತವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು, ಅಂದು ಎಲ್ಲ ಶಾಲಾ ಕಾಲೇಜುಗಳಲ್ಲಿ ಶಿಷ್ಠಾಚಾರದಂತೆ ಧ್ವಜಾರೋಹಣ ನೆರವೇರುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಹೆಚ್ಚುವರಿ ಎಸ್ಪಿ ಹೇಮಂತ್ ಕುಮಾರ್, ಡಿಡಿಪಿಐ ಶ್ರಿಶೈಲ ಬಿರಾದಾರ, ಡಿಡಿಪಿಯು ಜಗದೀಶ್ ಎಚ್.ಎಸ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ನಾಗರಾಜ ಜುಮ್ಮನ್ನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
