
ಬೆಳಗಾವಿ, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3 ರ ವಿತರಣೆಯಲ್ಲಾಗುತ್ತಿರುವ ಅಡಚಣೆಗಳನ್ನು ನಿವಾರಿಸಲು ಇನ್ನೆರೆಡು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯಕ್ ಅವರು ಪ್ರಶ್ನೆ ಕೇಳಿ, ಶಿರಸಿ ಸಿದ್ಧಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂ-3 ನೀಡುತ್ತಿಲ್ಲ. ಇದರಿಂದ ಪಟ್ಟಣ, ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಅವಕಾಶಗಳಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಜಿ.ಟಿ.ದೇವೇಗೌಡ ಇದಕ್ಕೆ ಬೆಂಬಲವಾಗಿ ಮಾತನಾಡಿ, ಗ್ರಾಮ ಪಂಚಾಯಿತಿಗಳಿಂದ ಮೇಲ್ದೆರ್ಜೆಗೇರಿರುವ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ-11 ಬಿ ಯನ್ನು ನೀಡುತ್ತಿಲ್ಲ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಿದರು.
ಶಾಸಕರಾದ ಕೋ.ನ.ರೆಡ್ಡಿ, ಸತೀಶ್ ಸೈಲ್ ಸೇರಿದಂತೆ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಚಿವ ರಹೀಂಖಾನ್ ಇದು ರಾಜ್ಯಾದ್ಯಂತ ಗಂಭೀರ ಸ್ವರೂಪದ ಸಮಸ್ಯೆಯಾಗಿದೆ. ಅದರ ನಿವಾರಣೆಗಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಎರಡು ಸಭೆಗಳಾಗಿದ್ದು, ಹಿಂದಿನ ಏಳೆಂಟು ದಿನಗಳಲ್ಲಿ ಮೂರನೇ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಬಿಬಿಎಂಪಿಯ ಮಾದರಿಯಲ್ಲಿ ಬಿ ಖಾತಾಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಹಿಂದೆ ಹಳೆಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರುವುದಿಲ್ಲ. ಫಾರಂ-ಸಿ ನೀಡಲು ಯೋಜಿತ ನಕ್ಷೆ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ಷರತ್ತುಗಳನ್ನು ವಿಸಲಾಗಿದೆ. ಅವುಗಳು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಾಗಿದೆ ಎಂದರು. ಶೀಘ್ರದಲ್ಲೇ ನಿರ್ಧಾರ ತೆಗೆದುಕೊಂಡು 2 ತಿಂಗಳೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್
