
ಬೆಂಗಳೂರು, 6 ಜನವರಿ(ಹಿ.ಸ):
ಆ್ಯಂಕರ್ :
ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಆಗುತ್ತಿದೆ ಎಂಬ ಪ್ರಕರಣ ಸಂಬಂಧ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆಯ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮಕ್ಕೆ ಇದೀಗ ಶಿಕ್ಷಣ ಇಲಾಖೆ , ಮಕ್ಕಳ ಸುರಕ್ಷತೆ ನಿಟ್ಟಿನಲ್ಲಿ ಹೊಸ ಸುತ್ತೋಲೆಯನ್ನೇ ಹೊರಡಿಸಿದೆ. ಶಾಲಾ ವಾಹನ ಚಾಲಕರು, ಸಹಾಯಕರಿಂದ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಹಿನ್ನಲೆ ಮಕ್ಕಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಹೊಸ ರೂಲ್ಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಸುತ್ತೋಲೆಯಲ್ಲಿ ಏನಿದೆ?
ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಎಲ್ಲಾ ಚಾಲಕರು ಪೊಲೀಸ್ ಠಾಣೆಗಳಿಂದ ಅವರ ನಡತೆಯ ಬಗ್ಗೆ ನಡವಳಿಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲು ಶಿಕ್ಷಣ ಇಲಾಖೆ ಆದೇಶಿಸಿದೆ. ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1999ಕ್ಕೆ ತಿದ್ದುಪಡಿ ತಂದು ಖಾಸಗಿ ಒಪ್ಪಂದ ವಾಹನಗಳಲ್ಲಿ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆ ಹಾಗೂ ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿ ರಚಿಸಲು ಕಛೇರಿಯಿಂದ ಸುತ್ತೋಲೆ ಹೊರಡಿಸಿದ್ದು, ನಡುವಳಿಕೆ ಪತ್ರವನ್ನ ಆಯಾ ಶಾಲೆಯ SATS ನಲ್ಲಿ ಅಪ್ಡೇಟ್ ಮಾಡಬೇಕು. ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸ ನಿರ್ವಹಿಸಲು ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು. ಪ್ರತಿ ಖಾಸಗಿ ಶಾಲಾ ವಾಹನದಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮರಾ ಅಳವಡಿಸಬೇಕು. ವಾಹನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯಬಾರದು. ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟ ನಂತರ, ಚಾಲಕರು ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡಬೇಕು. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ರೆ ಶಿಸ್ತು ಕ್ರಮದ ಎಚ್ಚರಿಕೆಯನ್ನ ಶಿಕ್ಷಣ ಇಲಾಖೆ ಕೊಟ್ಟಿದೆ.
ಹಿಂದೂಸ್ತಾನ್ ಸಮಾಚಾರ್
