
ಬೆಂಗಳೂರು,18 ಅಕ್ಟೋಬರ್ (ಹಿ.ಸ):
ಆ್ಯಂಕರ್ :ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಹಣ ಅಥವಾ ಇನ್ಯಾವುದೇ ಮಾಹಿತಿಯ ಬಗ್ಗೆ ಸಿಬಿಐ ತನಿಖೆ ಅಗತ್ಯವಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಯಾರನ್ನೂ ಹೇಳಿ-ಕೇಳಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆದಾಯ ತೆರಿಗೆ ಅಧಿಕಾರಿಗಳು ಹಣ ಯಾರಿಗೆ ಸಂಬಂಧಪಟ್ಟಿದೆ ಎಂಬುದನ್ನು ಅಗತ್ಯ ಸಂದರ್ಭದಲ್ಲಿ ಬಹಿರಂಗ ಮಾಡುತ್ತಾರೆ. ಬಹುಶಃ ಸದ್ಯದಲ್ಲಿ ತನಿಖೆ ನಡೆಯುತ್ತಿರುವುದರಿಂದ ಈವರೆಗೂ ಮಾಹಿತಿ ಹೊರ ಬಂದಿಲ್ಲ ಇರಬಹುದು ಎಂದರು. ಹಲವಾರು ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಅಗತ್ಯ ಮಾಹಿತಿ ನೀಡುತ್ತಾರೆ. ಅಧಿಕೃತ ಮಾಹಿತಿ ಪ್ರಕಟವಾಗದ ಹೊರತು ಹಣ ಅವರಿಗೆ ಸೇರಿದೆ, ಇವರಿಗೆ ಸೇರಿದೆ ಎಂದು ಊಹೆ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ನಿರಾಧಾರ, ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಬೆಳವಣಿಗೆಗಳಾಗಿರಲಿಲ್ಲವೇ ಎಂದು ಪ್ರಶ್ನಿಸಿದರು.
ಪ್ರಕರಣದಲ್ಲಿ ಗಂಭೀರತೆ ಇದೆ ಎಂದಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಸಿಬಿಐ ಸೇರಿದಂತೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಯಾರನ್ನೂ ಹೇಳಿ-ಕೇಳಿ ಮಾಡುವುದಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್-ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ್ದ ತಾವು ನಿನ್ನೆ ರಾತ್ರಿಯಷ್ಟೆ ಬಂದಿದ್ದೇನೆ. ಯಾವ ವಿಚಾರಗಳು ಗೊತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಭೇಟಿ ಮಾಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್
