ಬೆಂಗಳೂರು,
ಆ್ಯಂಕರ್:ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮಳೆಯಾಗಿದ್ದು , ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ.
ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಕರಾವಳಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಾಗ್ಯೂ, ಗುಡುಗು, ಭಾರೀ ಮಳೆ ಇಲ್ಲ ಎಂದು ವರದಿಯಲ್ಲಿ ತಿಳಿಸಿದೆ.
ತಾಪಮಾನ ಮುನ್ಸೂಚನೆ
ಕರಾವಳಿಯ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 20ರ ಬೆಳಗ್ಗೆ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಬಹಳಷ್ಟಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
