ಕೊಪ್ಪಳ
ಆ್ಯಂಕರ್: ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಬೈಕ್ ರ್ಯಾಲಿ ಮೂಲಕ ವಿಶೇಷಚೇತನರಿಂದ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ವಿಕಲಚೇತನರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆವರಣದಿಂದ ಕೇಂದ್ರೀಯ ಬಸ್ ನಿಲ್ದಾಣದವರೆಗೆ ಹಮ್ಮಿಕೊಂಡ ಈ ಸ್ವೀಪ್ ಜಾಗೃತಿ ವಿಶೇಷ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಚಾಲನೆ ನೀಡಿ, ವಿಶೇಷಚೇತನರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿಜ್ಞಾ ವಿಧಿ ಸ್ವೀಕಾರ: ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ನೆರೆದಿದ್ದ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ವಿಕಲಚೇತನ ಮತದಾರರ ಜಿಲ್ಲಾ ಚುನಾವಣಾ ರಾಯಭಾರಿ ಪೂರ್ಣಿಮಾ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ 16,000 ವಿಶೇಷಚೇತನ ಮತದಾರರಿದ್ದು, ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ಮೇ 7ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ವಿಶೇಷಚೇತನ ಮತದಾರರು ಮತದಾನದ ಹಕ್ಕನ್ನು ಚಲಾಯಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಸರಸಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಶ್ರೀದೇವಿ ಎಸ್. ಎನ್., ಕೊಪ್ಪಳ ತಾಪಂ ಇಓ ದುಂಡಪ್ಪ ತುರಾದಿ, ಸ್ವೀಪ್ ಜಿಲ್ಲಾ ಐಕಾನ್ಗಳಾದ ಶಿವಕುಮಾರ ಮಾಲಿಪಾಟೀಲ್, ಮಹೆಬೂಬ್ ಕಿಲ್ಲೆದಾರ, ಜಿಲ್ಲಾ ಐಇಸಿ ಸಂಯೋಜಕರಾದ ಶ್ರೀನಿವಾಸ ಚಿತ್ರಗಾರ, ಸೇರಿದಂತೆ ಇತರರು ಹಾಜರಿದ್ದರು.
ವಿಶೇಷ ಬೈಕ್ ರ್ಯಾಲಿ: ಈ ಅಭಿಯಾನದಲ್ಲಿ 100 ಕ್ಕಿಂತ ಅಧಿಕ ವಿಶೇಷಚೇತನರು ತಮ್ಮ ತ್ರಿಚಕ್ರ ವಾಹನದೊಂದಿಗೆ ಭಾಗವಹಿಸಿ ಜಿಲ್ಲಾಡಳಿತ ಭವನದಿಂದ ಹೊರಟು ಬಸವೇಶ್ವರ (ಗಂಜ್) ಸರ್ಕಲ್, ಅಶೋಕ್ ವೃತ್ತ ಮಾರ್ಗವಾಗಿ ಕೇಂದ್ರ ಬಸ್ ನಿಲ್ದಾಣದವರೆಗೆ ಸಂಚರಿಸಿ, ಜಾಗೃತಿ ಫಲಕಗಳನ್ನು ಹಿಡಿದು ಮತದಾರರಿಗೆ ಮತದಾನದ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.
